Teachers Award Program-2003
ಪ್ರಶಸ್ತಿಗಳು ನಮ್ಮ ಆತ್ಮವಿಶ್ವಾಸ ಹೆಚ್ಚಿಸುತ್ತವೆ : ಡಾ. ಡಿ ವಿ ಪರಮಶಿವಮೂರ್ತಿ
ಪ್ರಶಸ್ತಿ ಮತ್ತು ಪುರಸ್ಕಾರಗಳು ನಮ್ಮ ಕ್ಷೇತ್ರಗಳಲ್ಲಿ ಇನ್ನು ಹೆಚ್ಚಿನ ಕೆಲಸ ಮಾಡಲು ಹುರುಪು ತುಂಬುತ್ತವೆ. ನಮ್ಮಲ್ಲಿ ಆತ್ಮವಿಶ್ವಾಸ ಮತ್ತು ಹೊಸ ಚೈತನ್ಯ ತುಂಬುತ್ತವೆ ಎಂದು ಕನ್ನಡ ವಿಶ್ವವಿದ್ಯಾಲಯದ ಕುಲಪತಿಗಳಾದ ಡಾ. ಡಿ. ವಿ. ಪರಮಶಿವಮೂರ್ತಿ ಅವರು ಹೇಳಿದರು.
ಕನ್ನಡ ವಿಶ್ವವಿದ್ಯಾಲಯದ ಭುವನ ವಿಜಯ ಸಭಾಂಗಣದಲ್ಲಿ ದಿನಾಂಕ ೨೮.೩.೨೦೨೩ರಂದು ಹಮ್ಮಿಕೊಂಡಿದ್ದ ಪ್ರಶಸ್ತಿ ಪುರಸ್ಕೃತ ಅಧ್ಯಾಪಕರಿಗೆ ಸನ್ಮಾನ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಮಾತನಾಡುತ್ತ, ನಮ್ಮ ವಿಶ್ವವಿದ್ಯಾಲಯದ ಅಧ್ಯಾಪಕರು ಶ್ರಮ ಪೂರಕವಾಗಿ ಪ್ರಶಸ್ತಿ ಪಡೆದಿರುವುದು ನಮಗೆ ಹೆಮ್ಮೆಯ ಸಂಗತಿ. ವಿಶ್ವವಿದ್ಯಾಲಯದ ಅಧ್ಯಾಪಕರು ವಿವಿಧ ಕ್ಷೇತ್ರಗಳ ಸಂಶೋಧನೆಯಲ್ಲಿ ತಮ್ಮನ್ನು ತೊಡಗಿಸಿಕೊಂಡಿದ್ದು, ಸಮಾಜಕ್ಕೆ ಉತ್ತಮ ಕೊಡುಗೆ ನೀಡಿದ್ದಾರೆ. ನಮ್ಮ ವಿಶ್ವವಿದ್ಯಾಲಯದ ಬೋಧಕೇತರ ಸಿಬ್ಬಂದಿ ಹುಸೇನ್ ಅವರಿಗೆ ಕರ್ನಾಟಕ ಸರಕಾರದಿಂದ ಜಕಣಾಚಾರಿ ಪ್ರಶಸ್ತಿ ದೊರಕಿದ್ದು, ಮುಂದಿನ ದಿನಗಳಲ್ಲಿ ಅವರಿಗೂ ಕೂಡ ಸನ್ಮಾನ ಹಮ್ಮಿಕೊಳ್ಳಲಾಗುವುದು ಎಂದರು.
ಕನ್ನಡ ವಿಶ್ವವಿದ್ಯಾಲಯದ ಕುಲಸಚಿವರಾದ ಡಾ.ಎ. ಸುಬ್ಬಣ್ಣ ರೈ ಅವರು ಕಾರ್ಯಕ್ರಮವನ್ನು ಕುರಿತು ಮಾತನಾಡುತ್ತ, ವಿಶ್ವವಿದ್ಯಾಲಯದಲ್ಲಿ ಕೇವಲ ಅಧ್ಯಯನ ಅಲ್ಲದೇ, ವಿವಿಧ ಕ್ಷೇತ್ರಗಳಲ್ಲಿ ಉತ್ತಮ ಕಾರ್ಯನಿರ್ವಹಿಸಿದ್ದಾರೆ. ಇದನ್ನು ಗುರುತಿಸಿ ಸರ್ಕಾರ ಮತ್ತು ಸಮಾಜದ ವಿವಿಧ ಸಂಘ ಸಂಸ್ಥೆಗಳು ಪ್ರಶಸ್ತಿ-ಪುರಸ್ಕಾರಗಳನ್ನು ನೀಡಿ ಗೌರವಿಸಿವೆ. ಇಂತಹ ಸಾಧಕರನ್ನು ವಿಶ್ವವಿದ್ಯಾಲಯ ಸನ್ಮಾನಿಸುವುದು ಅಗತ್ಯವಾಗಿದೆ. ಮುಂದಿನ ದಿನಗಳಲ್ಲಿ ಈ ರೀತಿಯ ಕಾರ್ಯಕ್ರಮಗಳು ನಿರಂತರವಾಗಿ ನಡೆಯಲಿವೆ ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಪ್ರಶಸ್ತಿ ಪುರಸ್ಕೃತರಾದ ಡಾ. ಚಲುವರಾಜು, ಡಾ. ಎಫ್.ಟಿ. ಹಳ್ಳಿಕೇರಿ, ಡಾ. ಕೆ.ಎಂ. ಮೇತ್ರಿ, ಡಾ. ಎ. ಮೋಹನ್ ಕುಂಟಾರ್, ಡಾ. ಕೆ. ರವೀಂದ್ರನಾಥ, ಡಾ. ಅಮರೇಶ ಯತಗಲ್ ಇವರುಗಳಿಗೆ ಕನ್ನಡ ವಿಶ್ವವಿದ್ಯಾಲಯದ ವತಿಯಿಂದ ಸನ್ಮಾನಿಸಿ ಗೌರವಿಸಲಾಯಿತು. ಕಾರ್ಯಕ್ರಮದಲ್ಲಿ ದ್ರಾವಿಡ ಸಂಸ್ಕೃತಿ ಅಧ್ಯಯನ ವಿಭಾಗದ ಸಹ ಪ್ರಾಧ್ಯಾಪಕರಾದ ಡಾ. ಸಿ. ವೆಂಕಟೇಶ ಅವರು ಪ್ರಶಸ್ತಿ ಪುರಸ್ಕೃರ ಕುರಿತು ಮಾತನಾಡಿದರು.
ಕಾರ್ಯಕ್ರಮದಲ್ಲಿ ಕನ್ನಡ ವಿಶ್ವವಿದ್ಯಾಲಯದ ವಿವಿಧ ನಿಕಾಯದ ಡೀನರು, ಪ್ರಾಧ್ಯಾಪಕರು, ಸಂಶೋಧನಾರ್ಥಿಗಳು, ವಿದ್ಯಾರ್ಥಿಗಳು ಮತ್ತು ಬೋಧಕೇತರ ಸಿಬ್ಬಂದಿಗಳು ಉಪಸ್ಥಿತರಿದ್ದರು.